About the Author

ಬಂಡಾಯ ಸಾಹಿತ್ಯ ಚಳವಳಿಯ ಪ್ರಮುಖ ಲೇಖಕ ಬರಗೂರು ರಾಮಚಂದ್ರಪ್ಪ ಅವರು ಕತೆ-ಕಾದಂಬರಿ-ಕಾವ್ಯಗಳಂತಹ ಸೃಜನಶೀಲ ಕೃತಿಗಳ ಜೊತೆಗೆ ಚಿಂತನ ಪರ ಬರಹ, ವಿಮರ್ಶೆಗಳ ಮೂಲಕ ಹೆಸರಾದವರು. ರಾಮಚಂದ್ರಪ್ಪ ಅವರು 1946ರ ವರ್ಷದ ಅಕ್ಟೋಬರ್ 18ರಂದು ತುಮಕೂರು ಜಿಲ್ಲೆಯ ಬರಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಕೆಂಚಮ್ಮ, ತಂದೆ ರಂಗದಾಸಪ್ಪ.

ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ, ನಿರ್ದೇಶಕ ಆಗಿದ್ದರು. ಸಾಹಿತ್ಯದಷ್ಟೇ ಸಿನಿಮಾವನ್ನು ಗಾಢವಾಗಿ ಪ್ರೀತಿಸುವ ಅವರು ಸಿನಿಮಾದ ಕಮರ್ಷಿಯಲ್ ಸೂತ್ರಗಳಿಗೆ ಜೋತು ಬೀಳದೆ ಅಲ್ಲೂ ವಿಭಿನ್ನ ಹಾದಿ ಹಿಡಿದವರು. ಆಡಳಿಗಾರರಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷತೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷತೆ ಇವುಗಳಲ್ಲಿ ಬರಗೂರರು ದಕ್ಷರಾಗಿ ಕೆಲಸಮಾಡಿದ್ದಾರೆ. ಸಾಹಿತ್ಯ ಅಕಾಡೆಮಿಯಲ್ಲಿದ್ದಾಗ ಅಲೆಮಾರಿ ಮತ್ತು ಅರೆ ಅಲೆಮಾರಿ ಸಂಸ್ಕೃತಿಯ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡಿ, 40೦ಕ್ಕೂ ಅಧಿಕ ಕೃತಿಗಳು ಪ್ರಕಟವಾಗಲು ಕಾರಣರಾಗಿದ್ದಾರೆ.   ಪ್ರಸಕ್ತದಲ್ಲಿ ಅವರು ಪ್ರಾಥಮಿಕ ಪ್ರೌಢಶಾಲಾ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.   ಕನ್ನಡ ಪರ ಹೋರಾಟ ಮತ್ತು ಚಿಂತನೆಗಳಲ್ಲಿ ಅವರು ಎಂದೂ ಹಿಂದೆ ಬೀಳದವರು.

ಬರಗೂರರ ಸಾಹಿತ್ಯದ ಹಾದಿಯಲ್ಲಿನ ಕೆಲವು ಕೃತಿಗಳನ್ನು ನೆನೆಸಿಕೊಳ್ಳುವುದಾದರೆ ‘ಒಂದು ಊರಿನ ಕತೆಗಳು’, ‘ಕನ್ನಡಾಭಿಮಾನ’, ‘ಕಪ್ಪು ನೆಲದ ಕೆಂಪು ಕಾಲು’, ‘ಮರಕುಟಿಗ’, ‘ರಾಜಕಾರಣಿ’, ‘ಸಾಹಿತ್ಯ’, ‘ಸುಂಟರಗಾಳಿ’, ‘ಸೂತ್ರ’, ‘ಕಾಂಟೆಸ್ಸಾ ಕಾವ್ಯ’, ‘ಸಂಸ್ಕೃತಿ, ಶ್ರಮ ಮತ್ತು ಸೃಜನಶೀಲತೆ’, ‘ನೆತ್ತರಲ್ಲಿ ನೆಂದ ಹೂ’, ‘ಗುಲಾಮನ ಗೀತೆ’, `ಸಿನಿಮಾ : ಒಂದು ಜನಪದ ಕಲೆ`, ‘ಮರ್ಯಾದಸ್ಥ ಮನುಷ್ಯರಾಗೋಣ’ ಮುಂತಾದವು ತಕ್ಷಣ ನೆನಪಿಗೆ ಬರುತ್ತವೆ. ಬರಗೂರರ ‘ಸುಂಟರಗಾಳಿ’ ಕಥಾಸಂಕಲನಕ್ಕೆ  ರಾಜ್ಯ ಸಾಹಿತ್ಯ ಅಕಾಡೆಮಿಯ ಬಹುಮಾನ ದೊರೆತಿದೆ.

ಒಂದೇ ಪಾತ್ರವನ್ನು ಒಳಗೊಂಡ ವಿಶಿಷ್ಟ ಚಿತ್ರ ‘ಶಾಂತಿ’ ಗಿನ್ನೆಸ್ ಸಾಧನೆಗಳಲ್ಲಿ ದಾಖಲೆ ಮಾಡಿದೆ. ಬರಗೂರರ ಕಥೆ ಮತ್ತು ಹಾಡುಗಳು ಇತರ ನಿರ್ದೇಶಕರ ಚಲನಚಿತ್ರಗಳಲ್ಲಿ ಖ್ಯಾತಿಗಳಿಸಿವೆ. ‘ತಾಯಿ’ ಚಿತ್ರದ ಗೀತರಚನೆಗೆ  ರಾಷ್ಟ್ರಪ್ರಶಸ್ತಿ ದೊರೆತಿದ್ದು  ಚಿತ್ರ ಸಂಭಾಷಣೆಗೂ  ರಾಜ್ಯಪ್ರಶಸ್ತಿ ಗಳಿಸಿರುವ  ಹೆಗ್ಗಳಿಕೆ  ಇವರದ್ದಾಗಿದೆ.

‘ಪಂಪ ಪ್ರಶಸ್ತಿ’, ‘ನಾಡೋಜ’ ಪ್ರಶಸ್ತಿ,  ಕನ್ನಡ  ಸಾಹಿತ್ಯ ಪರಿಷತ್ತಿನ  ‘ನೃಪತುಂಗ ಪ್ರಶಸ್ತಿ’  ಹಾಗೂ ಹಲವಾರು ರಾಜ್ಯಮಟ್ಟದ, ಸಂಘ ಸಂಸ್ಥೆಗಳ  ಗೌರವಗಳು ಬರಗೂರು  ರಾಮಚಂದ್ರಪ್ಪನವರಿಗೆ ಸಂದಿವೆ.  ರಾಯಚೂರಿನಲ್ಲಿ  ನಡೆದ 82ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.

ಬರಗೂರು ರಾಮಚಂದ್ರಪ್ಪ

(18 Oct 1946)

Books by Author

ABOUT THE AUTHOR