About the Author

ಕಂಪಲಾಪುರ ವೀರಣ್ಣ ನಾರಾಯಣ ಅವರು ಜನಿಸಿದ್ದು 1948ರಲ್ಲಿ. ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು ಕಂಪಲಾಪುರ. ಅಮ್ಮ ಕೆಂಚಮ್ಮ ಮತ್ತು ಅಪ್ಪ ವೀರಣ್ಣ. ಮೊದಲ ಹಂತದ ಓದು ಪುತ್ತೂರು ಮತ್ತು ತಾಲ್ಲೂಕು ಕೇಂದ್ರ ಪಿರಿಯಾಪಟ್ಟಣದಲ್ಲಿ. ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ವಿಜ್ಞಾನವನ್ನು ತೆಗೆದುಕೊಂಡು ಪಿ.ಯು.ಸಿ. ಓದಿದರು. ಇಂಜಿನಿಯರಿಂಗ್ ಮಾಡಲು ಅವಕಾಶವಿದ್ದರೂ ಎಂಜಿನಿಯರ್ ಆಗಕೂಡದೆಂದು ತೀರ್ಮಾನಿಸಿದ ಕೆ.ಎ.ಎಸ್ ಮತ್ತೆ ಮೈಸೂರಿನ ಯುವರಾಜ ಕಾಲೇಜಿನಲ್ಲಿ ವಿಜ್ಞಾನದ ಅಭ್ಯಾಸವನ್ನು ಮುಗಿಸಿದರು. ಆನಂತರದಲ್ಲಿ ಬಿ.ಎಡ್. ಮುಗಿಸಿ ಆರಂಭಿಸಿದ್ದು ಹೈಸ್ಕೂಲಿನಲ್ಲಿ ಅಧ್ಯಾಪನ.

ಮುಂದಿನ ಓದಿಗಾಗಿ ಮತ್ತೆ ಬೆಂಗಳೂರಿನತ್ತ ಪಯಣ. ಆ ಹೊತ್ತಿಗೇನೆ ಸಾಹಿತ್ಯದ ಓದಿಗೂ ಬಿದ್ದು ಬರವಣಿಗೆಯಲ್ಲೂ ತೊಡಗಿಸಿಕೊಂಡಿದ್ದ ಕೆ.ವಿ.ಎನ್ ಮುಂದಿನ ಓದಿಗೆ ಬೆಂಗಳೂರು ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜಿನಲ್ಲಿ ಕನ್ನಡ ಎಂ.ಎ.ಗೆ ಸೇರಿದರು. ತಮ್ಮ ಜೊತೆ ಓದುಗರಾಗಿದ್ದ, ಕನ್ನಡದಲ್ಲಿ ಮಹತ್ವದ ಸ್ತ್ರೀವಾದಿ ಚಿಂತಕಿಯಾಗಿರುವ ಶ್ರೀಮತಿಯವರೊಡನೆ ಒಲುಮೆ ಸಂಭವಿಸಿದ್ದು ಇಲ್ಲಿಯೇ. ಗೆಳೆಯರ ಸಮ್ಮುಖದಲ್ಲಿ ಮದುವೆಯಾದರು. ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಅಧ್ಯಾಪನ ವೃತ್ತಿ ಆರಂಭಿಸಿದ ಅವರು ನಂತರ ಬೆಂಗಳೂರು ವಿಶ್ವವಿದ್ಯಾಲಯದ ಜಿ.ಎಸ್.ಎಸ್ ನೇತೃತ್ವದಲ್ಲಿದ್ದ ಕನ್ನಡ ಅಧ್ಯಯನ ಕೇಂದ್ರಕ್ಕೆ ಬಂದರು. ಜಿ.ಎಸ್.ಎಸ್ ಮಾರ್ಗದರ್ಶನದಲ್ಲಿ ಆನಂದವರ್ಧನನ 'ಧ್ವನ್ಯಾಲೋಕ'ವನ್ನು ಅಧ್ಯಯನ ಮಾಡಿ ಪಿಎಚ್. ಡಿ. ಪದವಿ ಪಡೆದರು.

ಬೋಧಿಸಿದ್ದು ಸಾಹಿತ್ಯ, ಸಾಹಿತ್ಯ ಮೀಮಾಂಸೆ ಮತ್ತು ಭಾಷಾವಿಜ್ಞಾನವನ್ನು ವಿಜ್ಞಾನದ ತಾತ್ವಿಕತೆಯನ್ನಿರಿಸಿಕೊಂಡೇ ಕೆ.ವಿ.ಎನ್ ಬೆಳೆದದ್ದು ಸಾಹಿತ್ಯ ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ಕನ್ನಡ ಸಂಸ್ಕೃತಿ ಚಿಂತಕರಾಗಿ. ತಿಳುವಳಿಕೆ ಮತ್ತು ನಡುವಳಿಕೆ ಎರಡರಲ್ಲೂ ಸರಳವಾಗಿರುವ ಕೆ.ವಿ.ಎನ್‌ 1993ರಲ್ಲಿ ಕನ್ನಡಿಗರ ಕನಸಿನ ಸಂಸ್ಥೆಯಾಗಿದ್ದ ಹಂಪಿ ಕನ್ನಡ ವಿಶ್ವವಿದ್ಯಾಲಯ ಅಸ್ತಿತ್ವಕ್ಕೆ ಬಂದ ಶುರುವಿನಲ್ಲೇ ರಿಜಿಸ್ಟಾರ್ ಆಗಿ ಅಲ್ಲಿನ ಆಡಳಿತ ನಿರ್ವಹಣೆಯೊಳಗೂ ಪ್ರವೇಶ ಪಡೆದರು. ಅಲ್ಲಿಂದ ನಿವೃತ್ತಿಯಾಗಿ ಹೊರಗೆ ಬರುವವರೆಗೆ ಹಲವು ಜನ ಕುಲಪತಿಗಳ ಅವಧಿಯಲ್ಲಿ ಆಡಳಿತ ಮತ್ತು ಅಧ್ಯಯನಗಳ ಮೂಲಕ ಕನ್ನಡ ವಿಶ್ವವಿದ್ಯಾಲಯವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದ ತಮ್ಮ ಅಧ್ಯಾಪನ ಸಂದರ್ಭದಲ್ಲೇ ಶುರುಮಾಡಿದ್ದ ಕನ್ನಡಭಾಷೆ ಮತ್ತು ಕನ್ನಡ ಸಂಸ್ಕೃತಿಯ ಚಿಂತನೆಗಳನ್ನು ಕನ್ನಡ ಸಮಾಜದ ಬೇರುಗಳನ್ನು ಮೂಲಕ ಅರಸುವ ಕೆಲಸವನ್ನು ಮತ್ತಷ್ಟು ಸ್ಪಷ್ಟವಾಗಿ ಮಂಡಿಸುತ್ತಾ ಬಂದರು. ಈಗಲೂ ಭಾಷೆ, ಸಾಹಿತ್ಯ, ಶಿಕ್ಷಣ ಮತ್ತು ವಿಜ್ಞಾನ ಮೊದಲಾಗಿ ಕನ್ನಡ ಸಮಾಜಕ್ಕೆ ಸಂಬಂಧಿಸಿದ ಯಾವುದರಲ್ಲೂ ಜರೂರಾಗಿ ನಡೆಯಬೇಕಿರುವ ಕೆಲಸ ಇದೇ ಎಂದು ತೊಡಗಿಸಿಕೊಂಡು ಈ ಕಾಲದ ಕನ್ನಡದ ಮಹತ್ವದ ಚಿಂತಕರಾಗಿದ್ದಾರೆ.

ಕೆ.ವಿ. ನಾರಾಯಣ

(20 Oct 1948)