About the Author

ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು.

ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದ ಜೀವ ಅವರದು.

ಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಸ್ಥೆಗಳನ್ನು ಪ್ರೋತ್ಸಾಹಿಸಿದರು, ಅನೇಕ ಸಂಸ್ಥೆಗಳಲ್ಲಿ ಸದಸ್ಯರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿದರು.

ಯಕ್ಷಗಾನ ಬಯಲಾಟಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1958) ಮತ್ತು ಸ್ವೀಡನ್ ಪ್ರಶಸ್ತಿ ಬಂದಿತು. ಮೂಕಜ್ಜಿಯ ಕನಸುಗಳು ಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ (1963) ನೀಡಿದರೆ, ಭಾರತ ಸರ್ಕಾರ ಪದ್ಮಭೂಷಣ (1968) ಬಿರುದಿತ್ತು ಗೌರವಿಸಿತು. ೧೯೫೧ರಲ್ಲಿ ಮೈಸೂರಿನಲ್ಲಿ ನಡೆದ 37ನೇ ಕನ್ನಡ ಸಾಹಿತ್ಯ ಸಮ್ಮೇಳನ (1951) ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿತು. ತಮ್ಮ ಪ್ರತಿಭೆ ಪ್ರದರ್ಶನ, ಸಾಹಿತ್ಯದ ಕೊಡುಗೆ, ಆದರ್ಶ ವ್ಯಕ್ತಿತ್ವಗಳಿಂದ ಕನ್ನಡದ ಅಪೂರ್ವ ಸಾಹಿತಿಯಾಗಿದ್ದ ಶಿವರಾಮ ಕಾರಂತರು 1997ರ ಡಿಸೆಂಬರ್ 9ರಂದು ಮಂಗಳೂರಿನಲ್ಲಿ ನಿಧನರಾದರು.

ಕಾರಂತರ ಹಾಗೆ ವೈವಿಧ್ಯಮಯ ಕೃತಿಗಳನ್ನು ರಚಿಸಿದವರು ಕನ್ನಡದಲ್ಲಿ ವಿರಳ.  ೪೪ ಕಾದಂಬರಿ, ೧೪ ನಾಟಕ, ೩ ಕಥಾಸಂಕಲನ, ೬ ಪ್ರಬಂಧಗಳು, ೯ ಕಲಾ ಗ್ರಂಥಗಳು, ೫ ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-೨೫, ಇತ್ಯಾದಿ ೧೫0ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತರು ಕನ್ನಡದ ಹಿರಿಮೆ ಸಾರುವ ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ವಿಜ್ಞಾನ ಪ್ರಪಂಚ, ಬಾಲ ಪ್ರಪಂಚ, ಚಿತ್ರಮಯಿ ದಕ್ಷಿಣ ಕನ್ನಡ, ಯಕ್ಷಗಾನ  ಬಯಲಾಟ, ಸಿರಿಗನ್ನಡ ಅರ್ಥಕೋಶ, ಕಿಸಾಗೌತಮಿ, ಹುಚ್ಚುಮನಸ್ಸಿನ ಹತ್ತು ಮುಖಗಳು, ಮೂಕಜ್ಜಿ ಕನಸುಗಳು ಮೊದಲಾದ ಕೃತಿಗಳು ಕನ್ನಡ ಸಾಹಿತ್ಯದ ಪ್ರಪಂಚದಲ್ಲೇ ಮೈಲಿಗಲ್ಲಿನ ಕೃತಿಗಳಾಗಿವೆ.

ಶಿವರಾಮ ಕಾರಂತ

(10 Oct 1902-09 Dec 1997)

Books by Author

Books about Author

Awards

BY THE AUTHOR

ABOUT THE AUTHOR