Poem

ಹಸಿವು

ಹಸಿವನ್ನ ನೀಗಿಸುವ
ಒಂದು ಕವಿತೆ ಬರೆದು ಕೊಡಿ,
ಎರಡ್ಹೊತ್ತು ತಿಂದು
ನಾಳೆಗೊಂದಿಷ್ಟು ಉಳಿಸಿಕೊಳ್ಳುವೆ

ಸಸ್ಯದ್ದೊ ,ಮಾಂಸದ್ದೊ
ಬೆಂದದ್ದೊ ,ಹಸಿ ಹಸಿಯೋ
ಯಾವುದೋ ಒಂದು
ನಾಲ್ಕು ಸಾಲು ಗೀಚಿ ಬಿಡಿ
ನನಗೀಗ ತುಂಬಾ ಹಸಿವಿದೆ

ನೀವು ಬರೆದು ಕೊಟ್ಟ
ಕವಿತೆಗಳ ಕೊನೆಯಲ್ಲಿ
ನಿಮ್ಮ ಹೆಸರನ್ನು ದಯವಿಟ್ಟೂ
ಬರೆಯಬೇಡಿ,
ಈ ಹಾಳು
ಹಸಿವಿಗೆ ಋಣಭಾರವನ್ನ
ಹೊರುವ ಶಕ್ತಿ ಇಲ್ಲ

ಇನ್ನೊಂದು ಮನವಿ
ಹಸಿವಿನ ಬಗ್ಗೆ
ಕವಿತೆ ಬರೆಯುವಾಗ
ನೀವು ಸ್ವಲ್ಪ ಹಸಿವನ್ನಿರಿಸಿಕೊಳ್ಳಿ,
ಹೊಟ್ಟೆ ತುಂಬಿದ ಪದಗಳಿಗೆ
ನಿದ್ದೆ ಜಾಸ್ತಿ.

- ಮಾನಸ ಗಂಗೆ

ಶಶಿರೇಖಾ ನಾಗೇಶ(ಮಾನಸ ಗಂಗೆ)

ಲೇಖಕಿ ಶಶಿರೇಖಾ ನಾಗೇಶ ಅವರು ಮೂಲತಃ ಬೆಂಗಳೂರಿನವರು. ಕಾವ್ಯ ನಾಮ ಮಾನಸಗಂಗೆ. ಹತ್ತನೇ ತರಗತಿಯವರೆಗೆ ವಿದ್ಯಾಭ್ಯಾಸ ಪಡೆದಿರುವ ಅವರು ನೇಕಾರಿಕೆಯನ್ನು ಅವಲಂಬಿಸಿದ್ದಾರೆ. ಪ್ರಸ್ತುತ, ತುಮಕೂರು ಜಿಲ್ಲೆಯ ತಿಪಟೂರಿನವರು. 

ಕೃತಿಗಳು: ಹಣತೆ (ಕವನ ಸಂಕಲನ) 

 

More About Author