Poem

ಕಣ್ಬೆಳಕ ಕಂದೀಲು

ಕತ್ತಲೆಯ ಕಾನನದಿ ಕಣ್ಬೆಳಕ ಕಂದೀಲು
ತೋರುತಿದೆ ದಾರಿ ನಾಳೆಯ ಹಗಲೂರಿಗೆ;
ಕವುಚಿಕೊಳ್ಳುತಿಹುದು ಕಡುಗಪ್ಪ ಮುಗಿಲು
ಭಯಬೇಡ ಸುರಿವುದು ಹೂಮಳೆ ಇಳೆಗೆ!

ನಿಧಾನವಾಗಿ ನಡೆ, ಯಾವ ಅವಸರವಿಲ್ಲ
ಜೊತೆಗೆ ನಾನೂ ಬರುವೆ, ಊರು ದೂರವಿಲ್ಲ
ನಡಿಗೆಯ ಶ್ರಮ ತಿಳಿಯದು, ಹಾಡೊಂದ ಹಾಡು
ಶೃತಿ ಬೇಕೇ? ಹಿಡಿ ಜೀರುಂಡೆ ಇಂಚರದ ಜಾಡು

ಏನದು ಅಲ್ಲಿ.. ಮಿರಿಮಿರಿಯೆಂದು ಮಿನುಗುತಿದೆ?
ಅರೆ! ಇರುಳಿನೊಳಗೆ ಮಿಣುಕುಹುಳು!
ಯಾವುದದು ನಾದ.. ಕಲರವದಿ ಮೊಳಗುತಿದೆ?
ಅಹಾ! ನೀರವದೊಳಗೆ ನೀರ ಜುಳುಜುಳು!

-ಆಶಾ ರಘು

ವಿಡಿಯೋ
ವಿಡಿಯೋ

ಆಶಾ ರಘು

ಆಶಾ ರಘು ಅವರು ಕನ್ನಡದ ಪ್ರಮುಖ ಕಾದಂಬರಿಗಾರ್ತಿಯರಲ್ಲಿ ಒಬ್ಬರು. ಇವರು ಕೇಶವ ಅಯ್ಯಂಗಾರ್ ಹಾಗೂ ಸುಲೋಚನ ದಂಪತಿಗಳ ಹಿರಿಯ ಮಗಳಾಗಿ 1979ರ ಜೂನ್ 18 ನೇ ತಾರೀಖಿನಂದು ಬೆಂಗಳೂರಿನಲ್ಲಿ ಹುಟ್ಟಿದರು. ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಉಪನ್ಯಾಸಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿರುವ ಇವರು, ರಂಗಭೂಮಿ, ಕಿರುತೆರೆ, ಬೆಳ್ಳಿತೆರೆಗಳಲ್ಲಿಯೂ ಕಲಾವಿದೆಯಾಗಿ, ಸಂಭಾಷಣೆಕಾರರಾಗಿ, ಸಹಾಯಕ ನಿರ್ದೇಶಕರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ.

'ಆವರ್ತ', 'ಗತ', 'ಮಾಯೆ', 'ಚಿತ್ತರಂಗ' ಮೊದಲಾದ ಕಾದಂಬರಿಗಳನ್ನೂ, 'ಆರನೇ ಬೆರಳು', 'ಬೊಗಸೆಯಲ್ಲಿ ಕಥೆಗಳು', 'ಅಪರೂಪದ ಪುರಾಣ ಕಥೆಗಳು' ಮೊದಲಾದ ಕಥಾಸಂಕಲನಗಳನ್ನೂ, 'ಚೂಡಾಮಣಿ', 'ಕ್ಷಮಾದಾನ', 'ಬಂಗಾರದ ಪಂಜರ ಮತ್ತು ಇತರ ಮಕ್ಕಳ ನಾಟಕಗಳು' 'ಪೂತನಿ ಮತ್ತಿತರ ನಾಟಕಗಳು'  ಮೊದಲಾದ ನಾಟಕ ಕೃತಿಗಳನ್ನು ರಚಿಸಿದ್ದಾರೆ. ಇವರ 'ಆವರ್ತ' ಕಾದಂಬರಿಯ ಕುರಿತ ಕೃತಿ 'ಆವರ್ತ-ಮಂಥನ' ಕೂಡಾ ಪ್ರಕಟಗೊಂಡಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (2014), ಸೂರ್ಯನಾರಾಯಣ ಚಡಗ ಪ್ರಶಸ್ತಿ (2014), ಕನ್ನಡ ಸಾಹಿತ್ಯ ಪರಿಷತ್ತಿನ ಪಳಕಳ ಸೀತಾರಾಮಭಟ್ಟ ಪ್ರಶಸ್ತಿ (2019), ರಾಯಚೂರು ಕನ್ನಡ ಸಾಹಿತ್ಯ ಪರಿಷತ್ತಿನ ರಾಜಲಕ್ಷ್ಮಿ ಬರಗೂರು ರಾಮಚಂದ್ರಪ್ಪ ಪ್ರಶಸ್ತಿ (2020), ಸೇಡಂನ ಅಮ್ಮ (2021), ಕರ್ನಾಟಕ ಲೇಖಕಿಯರ ಸಂಘದ ತ್ರಿವೇಣಿ ದತ್ತಿನಿಧಿ ಪ್ರಶಸ್ತಿ (2023)ಗಳನ್ನು ಪಡೆದಿದ್ದಾರೆ. ಮಂಡ್ಯಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 2023 ರಲ್ಲಿ ಇವರಿಗೆ 'ಸಾಹಿತ್ಯಾಮೃತ ಸರಸ್ವತಿ' ಎಂಬ ಬಿರುದು ನೀಡಿ ಗೌರವಿಸಿದೆ.

More About Author